ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ: ಪತ್ರಕರ್ತರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪ್ರಭಾಕರ ಶರ್ಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎ.ಪ್ರಭಾಕರ ಶರ್ಮ, ಪತ್ರಕರ್ತರ ಸಂಘ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಮಾದರಿಯಾಗಿವೆ. ಕುತ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಿರುವುದು ಶ್ಲಾಘನೀಯ. ಆದರೆ ಅಷ್ಟಕ್ಕೇ ಸೀಮಿತಗೊಳಿಸದೆ ಶಾಲೆಯ ಅಭಿವೃದ್ಧಿಗೆ ತಮ್ಮಿಂದಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಪಕತ್ರಕರ್ತರು ಕೇವಲ ವರದಿ ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ ಎಂಬುದನ್ನು ದ.ಕ. ಪತ್ರಕರ್ತರು ತೋರಿಸಿಕೊಟ್ಟಿದ್ದಾರೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಗುರುತಿಸಬೇಕಾದ ಅಂಶ ಎಂದವರು ಹೇಳಿದ ಅವರು. ದ.ಕ. ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಕೂಡ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರಸ್ತುತ ರಕ್ತದ ಸಂಗ್ರಹ ಕಡಿಮೆ ಇದ್ದು, ಇದನ್ನು ಹೆಚ್ಚಿಸುವ ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿ, ಪತ್ರಕರ್ತರ ಗ್ರಾಮವಾಸ್ತವ್ಯದಿಂದಾಗಿ ಈಗ ತಮ್ಮೂರಿನ ಚಿತ್ರಣವೇ ಬದಲಾಗಿದೆ. ಗ್ರಾಮ ವಾಸ್ತವ್ಯದ ಸಂದರ್ಭ ಊರವರಿಂದ ಬಂದ ೧೬೮ ಮನವಿಗಳ ಪೈಕಿ ಈಗಾಗಲೇ ೧೨೦ ಮನವಿಗಳಿಗೆ ಸ್ಪಂದನೆ ಸಿಕ್ಕಿದೆ. ಕಂಪ್ಯೂಟರ್, ಶಾಲಾ ಆವರಣ ಗೋಡೆ ನೀರ್ಮಾಣ, ನೋಟ್‌ಬುಕ್ ವಿತರಣೆ ಹೀಗೆ ಹಲವು ರೀತಿಯಲ್ಲಿ ಪತ್ರಕರ್ತರ ಸಂಘ ನೆರವಾಗಿದೆ ಎಂದವರು ಶ್ಲಾಸಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ರಾಜ್ಯ ಘಟಕದ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ್ ಡಿ. ಪಳ್ಳಿ ವಂದಿಸಿ, ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

error: Content is protected !!