ರಾಜ್ಯದಲ್ಲಿ ಮತ್ತೆ ಕೊರೊನಾ ಕರಿನೆರಳು..!: ಕೊವೀಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ..!: ಮಾಸ್ಕ್ ಧರಿಸದಿದ್ದರೆ ಬೀಳುತ್ತಾ ದಂಡ..?

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತಾ ಕ್ರಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಸಧ್ಯಕ್ಕೆ ದಂಡ ವಿಧಿಸುವುದಿಲ್ಲ. ಆದರೆ, ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದರು.ಎಲ್ಲಾ ಥಿಯೇಟರ್‌ಗಳು, ಮಾಲ್‌ಗಳು, ಹೋಟೆಲ್, ರೆಸ್ಟೋರೆಂಟ್, ಒಳಾಂಗಣ ಕಾರ್ಯಕ್ರಮ, ಸಾರ್ವಜನಿಕ ಸ್ಥಳಗಳು, ಸಭೆ, ಸಮಾರಂಭ, ಶಾಲಾ – ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದರು. ರಾಜ್ಯದ ಎಲ್ಲ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ಗಳಲ್ಲಿ ಮಾಲೀಕರು ಹಾಗೂ ಸಿಬ್ಬಂದಿಗೆ ಮಾಸ್ಕ್ ಹಾಗೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ.

ಮೂರನೇ ಡೋಸ್ ಬೂಸ್ಟರ್ ಡೋಸ್ ಲಸಿಕೆ ಪಡೆಯುವುದು ಕೂಡ ಉತ್ತಮ. ಇನ್ನು ಹೋಟೆಲ್, ಪಬ್, ರೆಸ್ಟೋರೆಂಟ್‌ಗಳಲ್ಲಿ ಈಗಿರುವಷ್ಟೇ ಸೀಟ್‌ಗಳಿಗೆ ಮಾತ್ರ ಜನರಿಗೆ ಅವಕಾಶ ನೀಡಬೇಕು. ಹೊಸದಾಗಿ ಹೆಚ್ಚುವರಿ ಸೀಟ್ ವ್ಯವಸ್ಥೆಗಳನ್ನು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ಜೊತೆಗೆ ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೊಡ್ ಸೇರಿದಂತೆ ಎಲ್ಲೆಲ್ಲೆ ಸಂಭ್ರಮಾಚರಣೆ ಮಾಡಲಾಗುವುದೋ ಅಲ್ಲಿ ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯ. ಸಂಭ್ರಮಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗುವುದು. 1 ಗಂಟೆ ಬಳಿಕ ಯಾವುದೇ ಹೊಸ ವರ್ಷಾಚರಣೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದರು.

ವಿಶೇಷವಾಗಿ ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳು ಜನಸಂದಣಿಯಿರುವ ಪ್ರದೇಶಗಳಲ್ಲಿ ಹಾಗೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳದಿರುವುದು ಒಳಿತು ಎಂದು ತಿಳಿಸಿದರು.

error: Content is protected !!