ಜು.8: ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಆಯೋಜನೆ: ಸಾಹಿತ್ಯ ಅವಲೋಕನ, ಅಭಿನಂದನೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಬೆಳ್ತಂಗಡಿ: ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ ಎಂದು ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ತಿಳಿಸಿದ್ದಾರೆ.

ಅವರು ಶುಕ್ರವಾರ ಬೆಳ್ತಂಗಡಿ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ, 1953ರಲ್ಲಿ ಪುತ್ತೂರಿನ ಪೋಳ್ಯದಲ್ಲಿ ಜನಿಸಿದ ರಾಮಕೃಷ್ಣ ಶಾಸ್ತ್ರಿಅವರು ಎಳವೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ನೆಲೆಸಿದ್ದು ತನ್ನ 11ನೆಯ ವಯಸ್ಸಿನಲ್ಲಿ ಬರವಣಿಗೆ ಆರಂಭಿಸಿದ್ದರು. 7ನೆಯ ತರಗತಿವರೆಗೆ ಮಾತ್ರ ಶಾಲಾ ವಿದ್ಯಾಭ್ಯಾಸ ಮಾಡಿದ್ದರೂ ಶಾಲೆ, ಪದವಿ ತರಗತಿಗೆ ಪಠ್ಯವಾಗುವಷ್ಟು ಸಮಗ್ರ ಬರವಣಿಗೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಜು.8ರಂದು ಅಪರಾಹ್ನ 2 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು ಕಾರ್ಯಕ್ರಮಕ್ಕೆ ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಪ್ರಾಚಾರ್ಯ ಡಾ| ಎನ್. ಎಂ. ಜೋಸೆಫ್ ಚಾಲನೆಯನ್ನು ನೀಡಲಿದ್ದಾರೆ.

ಯಕ್ಷಗಾನಾಮೃತದಲ್ಲಿ ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಗಿರೀಶ್ ರೈ ಕಕ್ಯಪದವು, ಹಿಮ್ಮೇಳದಲ್ಲಿ ಕೃಷ್ಣಪ್ರಕಾಶ ಉಳಿತ್ತಾಯ, ಶಿತಿಕಂಠ ಭಟ್ ಉಜಿರೆ, ನಿರೂಪಣೆಯಲ್ಲಿ ಬಿ. ಎನ್. ಗಿರೀಶ್ ಹೆಗ್ಡೆ ಧರ್ಮಸ್ಥಳ ಭಾಗವಹಿಸುತ್ತಾರೆ ಎಂದರು.

ಅಪರಾಹ್ನ 3.30 ರಿಂದ ಪ. ರಾಮಕೃಷ್ಣ ಶಾಸ್ತ್ರಿಗಳ ಸಾಹಿತ್ಯ ಅವಲೋಕನದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಂ. ಪಿ. ಶ್ರೀನಾಥ್ ಉಜಿರೆ ವಹಿಸಲಿದ್ದಾರೆ. ಪತ್ರಿಕಾ ಲೇಖನ ವಿಷಯದ ಕುರಿತು ಉದಯವಾಣಿ ನಿವೃತ್ತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ ಮಣಿಪಾಲ, ಸಮಗ್ರ ಸಾಹಿತ್ಯ ಕುರಿತು ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಉಪನ್ಯಾಸಕ ಡಾ| ಕೃಷ್ಣಾನಂದ ಪಿ.ಎಂ. ಗರ್ಡಾಡಿ, ಮಕ್ಕಳ ಸಾಹಿತ್ಯ ಕುರಿತು ಬೆಳ್ತಂಗಡಿಯವರೇ ಆದ ಸಾಹಿತಿ ಡಾ| ದೀಪಾ ಪಡ್ಕೆ ಬೆಂಗಳೂರು ಮಾತನಾಡಲಿದ್ದಾರೆ.

ಸಂಜೆ 5 ರಿಂದ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು ಪುಸ್ತಕ ಬಿಡುಗಡೆ, ಅಭಿನಂದನೆ, ಗೌರವ ಸಾನ್ನಿಧ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತ್ರಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಸ್ತ್ರಿ ಉಪಸ್ಥಿತರಿರುತ್ತಾರೆ.

ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆಯಾಗಲಿವೆ ಎಂದರು.

ಮಕ್ಕಳ ಕತೆ ಇವರ ಜನಪ್ರಿಯ ಮಾಧ್ಯಮವಾದರೂ ಕತೆ, ಲೇಖನ, ಕಾದಂಬರಿ, ಕವಿತೆ, ವಿಡಂಬನೆ, ನಾಟಕ, ಹನಿಗವನ ಹೀಗೆ ಎಲ್ಲ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆಕಾಶವಾಣಿ, ದೂರದರ್ಶನದಲ್ಲೂ ಕಾರ್ಯಕ್ರಮಗಳು ಪ್ರಸಾರವಾಗಿವೆ. ಲೇಖನಗಳು, ಕತೆಗಳು ತುಳು, ಇಂಗ್ಲಿಷ್, ಮಲಯಾಳ, ಹಿಂದಿ ಭಾಷೆಗೆ ಅನುವಾದಗೊಂಡಿವೆ. ಸಮಾಜಸೇವೆ, ಅಭಿವೃದ್ಧಿಯ ಪುರೋಗಾಮಿ ಚಿಂತನೆ, ಸಹಕಾರಿ ಕ್ಷೇತ್ರದಲ್ಲೂ ಅನುಭವ, ಯಕ್ಷಗಾನ ಕ್ಷೇತ್ರದಲ್ಲೂ ಭಾಗವಹಿಸುವಿಕೆ ಇದೆ. ಹೀಗೆ ಎಲ್ಲ ರಂಗದಲ್ಲಿ ತೊಡಗಿಸಿಕೊಂಡವರು. ಈ ನಿಟ್ಟಿನಲ್ಲಿ ಅವರ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ನಡೆಸಬೇಕೆಂಬ ಇರಾದೆಯಿಂದ ಆತ್ಮೀಯರು ಒಟ್ಟಾಗಿ ಈ ಸಮಾರಂಭ ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎನ್. ಅಶೋಕ ಭಟ್ ಉಜಿರೆ, ಸಂಚಾಲಕರು, ಕುರಿಯ ವಿಠಲಶಾಸ್ತ್ರಿಸಾಂಸ್ಕೃತಿಕ ಪ್ರತಿಷ್ಠಾನ, ಡಾ. ಶ್ರೀನಾಥ್ ಎಂ.ಪಿ., ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ದ.ಕ. ಜಿಲ್ಲೆ, ಯದುಪತಿ ಗೌಡ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಘಟಕ ಉಪಸ್ಥಿತರಿದ್ದರು

error: Content is protected !!