ಬೆಳ್ತಂಗಡಿ : ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಘಟನೆ: ಇಬ್ಬರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀರ್ ಮತ್ತು ರೌಫ್ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪ್ರತೀಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

error: Content is protected !!