5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರಿಯಲು ಅವಕಾಶ

 

 

 

ಬೆಂಗಳೂರು: ಸುಪ್ರೀಂ ಕೋರ್ಟ್ ಫಲಿತಾಂಶ ಪ್ರಕಟಕ್ಕೆ ತಡೆ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಭವಿಷ್ಯದ ಕುರಿತು ಅತಂತ್ರಕ್ಕೆ ಸಿಲುಕಿದ್ದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಂತಸದ ಸುದ್ದಿಯನ್ನು ನೀಡಿದೆ. ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಅವಕಾಶ ಕಲ್ಪಿಸಿ ಇಲಾಖೆ ಆದೇಶಿಸಿದೆ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಪಡೆದುಕೊಂಡಿದ್ದಾರೆ.
2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ:ಎಪ್ರಿಲ್ 08-ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳು ಇದೀಗ ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿ ಅತಂತ್ರದಲ್ಲಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಿಲೀಫ್ ನೀಡಿದೆ.ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ಮೇ 29 ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮವಹಿಸಿ ಇಲಾಖೆ ಆದೇಶ ಹೊರಡಿಸಿದೆ.
ಸರ್ವೋಚ್ಛ ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ

FA-1, 2, 3, 4, ಹಾಗೂ SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರಿಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

error: Content is protected !!