ಕನ್ನಡದ ಪ್ರಸಿದ್ಧ ನಿರೂಪಕಿ ಅಪರ್ಣಾ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಕನ್ನಡದ ಪ್ರಸಿದ್ಧ ನಿರೂಪಕಿ, ಕಿರುತೆರೆ ನಟಿ ಅಪರ್ಣಾ ಜು.11ರಂದು ನಿಧನರಾದರು.
ತನ್ನ ಭಾಷಾ ಬಳಕೆ ಹಾಗೂ ಭಾಷಾ ಪ್ರೇಮಕ್ಕಾಗಿ ಕನ್ನಡಿಗರ ಹೃದಯದಲ್ಲಿ ಜಾಗ ದಕ್ಕಿಸಿಕೊಂಡ ಅದ್ಭುತ ನಿರೂಪಕಿಯೂ, ಹೆಮ್ಮೆಯ ಕನ್ನಡತಿಯೂ ಆಗಿ ನಟನೆಯಲ್ಲೂ ಕಾಣಿಸಿಕೊಂಡಿದ್ದರು. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ’: ಸಿಎಂ ಸಿದ್ದರಾಮಯ್ಯ

‘ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ’.
‘ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ’.

‘ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ’: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ


‘ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡAತಾಗಿದೆ’.
‘ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’.

‘ಕಲಾ ಲೋಕಕ್ಕೆ ತುಂಬಲಾರದ ನಷ್ಟ’: ಡಿಸಿಎಂ ಡಿಕೆ ಶಿವಕುಮಾರ್


‘ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು’

error: Content is protected !!