ನವದೆಹಲಿ: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪದಲ್ಲಿ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಆರ್.ಅಯ್ಯರ್ ಅವರು ದೂರು ನೀಡಿದ್ದರು. ಈ ಪಕ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿ, ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.
ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು. ಇದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್ಐಆರ್ ದಾಖಲಿಸಬಾರದು ಎಂದು ಪೀಠ ಆದೇಶಿಸಿತು.
ಸದ್ಯ ಈ ಪ್ರಕರಣದಲ್ಲಿ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.