ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಬ್ರಹ್ಮಾವರ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ಹೈಕೋರ್ಟ್ಗೆ ಮಹೇಶ್ ಶೆಟ್ಟಿ ತಿಮರೋಡಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ತಮ್ಮನ್ನು ಬಂಧಿಸವ ಸಂದರ್ಭದಲ್ಲಿ ತನಿಖಾಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ. ತರಾತುರಿಯಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ ಎಂದು ಆರ್ಜಿಯಲ್ಲಿ ವಿವರಿಸಿದ್ದಾರೆ.
ಅರ್ಜಿಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣಾ ಪೊಲೀಸರು ಮತ್ತು ಪ್ರಕರಣದ ದೂರದಾರ ರಾಜೀವ್ ಕುಲಾಲ್ ಅವರನ್ನು ಪ್ರತಿವಾದಿಯನ್ನಾಗಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿದಿಯಾಗಬೇಕಿದೆ.
ಅಲ್ಲದೆ, ಪ್ರಕರಣದಲ್ಲಿ ದೂರುದಾರ ರಾಜೀವ್ ಕುಲಾಲ್ ಮತ್ತು ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆತನ ವಿರುದ್ಧ ನಾನು ಯಾವುದೇ ಅವಹೇಳಕಾರಿ ಹೇಳಿಕೆ ನೀಡಿಲ್ಲ. ಮೂರನೇ ವ್ಯಕ್ತಿಯಾದ ಬಿ.ಎಲ್. ಸಂತೋಷ್ ಪರವಾಗಿ ಕುಲಾಲ್ ದೂರು ದಾಖಲಿಸಿದ್ದಾರೆ. ಆತ ದಾಖಲಿಸಿದ ದೂರು ಆಧರಿಸಿ 2025ರ ಆ.21ರಂದು ತಮ್ಮನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ದಾಖಲಾದ ಕೂಡಲೇ ಪೊಲೀಸರು ಅತಿವೇಗದಲ್ಲಿ ತಮ್ಮ ಪತ್ನಿಗೆ ಮೊದಲ ನೋಟಿಸ್ ನೀಡಿದ್ದಾರೆ. ನಂತರ ಎರಡನೇ ನೋಟಿಸ್ ನೀಡಿದ್ದಾರೆ. ಈ ಎರಡೂ ನೋಟಿಸ್ ನೀಡುವಾಗ ನಿಗದಿತ ನಿಯಮಗಳನ್ನು ಪಾಲಿಸಿಲ್ಲ. ಇನ್ನೂ ತಮ್ಮನ್ನು ಬಂಧಿಸಲು ಸೂಕ್ತ ಕಾರಣ ನೀಡಿಲ್ಲ. ಬಂಧನ ಮಾಹಿತಿ ಕುರಿತು ತಮ್ಮ ಕುಟುಂಬದವರಿಗೆ ಅರೆಸ್ಟ್ ಮೆಮೊ ಸಹ ನೀಡಿಲ್ಲ. ಇದರಿಂದ ಬಂಧನ ಪ್ರಕ್ರಿಯೆ ದೋಷಪೂರಿತವಾಗಿದೆ. ಆದ್ದರಿಂದ ಎಫ್ಐಆರ್ ರದ್ದುಪಡಿಸಬೇಕು ಎಂದು ತಿಮರೋಡಿ ಅರ್ಜಿಯಲ್ಲಿ ಕೋರಿದ್ದಾರೆ.