ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರ ರಜಾ ಕಾಲದ ನ್ಯಾಯಪೀಠ ಈ ತಡೆಯಾಜ್ಞೆ ನೀಡಿದೆ.
ಅಲ್ಲದೆ, ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರನ್ನು ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಮನವಿ ಆಲಿಸಿದ ನ್ಯಾಯಪೀಠ, ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಆದೇಶ ಮಾಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ವಿವಿಧ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಅವರಿಂದ ಶಾಂತಿ ಭಂಗಕ್ಕೆ ಕಾರಣವಾಗುತ್ತಿದೆ. ಜಾತಿ ಜಾತಿಗಳ ನಡುವೆ ಗೊಂದಲ ಸೃಷ್ಟಿಸಿದ್ದು, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡಿರುತ್ತಾರೆ. ಆದ ಕಾರಣ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂಬುದಾಗಿ ಬಂಟ್ವಾಳ ಉಪವಿಭಾಗದ ಪೊಲೀಸರು ಮನವಿ ಸಲ್ಲಿಸಿರುತ್ತಾರೆ. ಈ ಮನವಿಯನ್ನು ಪರಿಗಣಿಸಿದ್ದ ಪುತ್ತೂರಿನ ಸಹಾಯಕ ಆಯುಕ್ತರು ತಿಮರೋಡಿ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಆದೇಶಿಸಿದ್ದರು. ಈ ಆದೇಶ ರದ್ದುಮಾಡಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.