ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ :ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ :

 

 

 

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಿಕೊಳ್ಳುವಂತೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಹಾಗೂ ನ್ಯಾ. ಎಸ್. ರಾಚಯ್ಯ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. ವಿಚಾರಣೆ ವೇಳೆ ತಿಮರೋಡಿ ಪರ ವಕೀಲರು, ಪ್ರಕರಣವು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ಅರ್ಜಿದಾರರಿಗೆ ಕಿರುಕುಳ ನೀಡಲೆಂದೇ ಇಡೀ ರಾಜ್ಯದ ಆಡಳಿತ ಯಂತ್ರ ಅವರ ಹಿಂದೆ ಬಿದ್ದಿದೆ. ಖುಲಾಸೆಗೊಂಡ ಪ್ರಕರಣಗಳನ್ನು ಉಲ್ಲೇಖಿಸಿ ಗಡಿಪಾರು ಆದೇಶ ಹೊರಡಿಸಲಾಗಿದೆ. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ಆದ್ದರಿಂದ ಗಡಿಪಾರು ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೋಕೇಟ್ ಜನರಲ್, ಗಡಿಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ಬಲವಾಗಿ ಆಕ್ಷೇಪಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಮೆರಿಟ್ ಬಗ್ಗೆ ಉಲ್ಲೇಖಿಸುವುದಿಲ್ಲ. ಆದರೆ, ಮೇಲ್ಮನವಿ ಸಲ್ಲಿಸಿರುವುದು ತಾಂತ್ರಿಕವಾಗಿ ತಪ್ಪಾಗಿದೆ. ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ನೇರವಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತವಲ್ಲ. ಆ ಹಿನ್ನೆಲೆಯಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿತು. ಅಲ್ಲದೇ ಅರ್ಜಿ ಸಂಬಂಧ ಸರ್ಕಾರ, ಪುತ್ತೂರು ವಿಭಾಗಾಧಿಕಾರಿ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿತು.

error: Content is protected !!