
ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರು ರಾಜಭವನ ಭೇಟಿಗೆ ಸಮಯಾವಕಾಶ ಕೋರಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗೆ ಪುಷ್ಟಿ ಸಿಕ್ಕಿದೆ.
ದೆಹಲಿಯಲ್ಲಿ ಹೈಕಮಾಂಡ್ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆ ಜೋರಾಗಿ ಕೇಳಿಬರುತ್ತಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜೊತೆಗೆ ಅಧಿಕಾರ ಹಸ್ತಾಂತರದ ಬಗ್ಗೆ ಸಭೆ ವೇಳೆ ಚರ್ಚೆ ನಡೆಸಿದ್ದರು. ಅಲ್ಲದೆ, ರಾಷ್ಟ್ರೀಯ ರಾಜಕಾರಣಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ರಾಜ್ಯಸಭೆ ಸ್ಥಾನಕ್ಕೆ ಬರುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಎರಡು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂಬ ಚರ್ಚೆ ಜೋರಾಗಿ ಹರದಾಡಲು ಆರಂಭವಾಯಿತು. ಕಾಂಗ್ರೆಸ್ ಪಾಳೆಯದಿದಂಲೇ ಈ ಬಗ್ಗೆ ಮಾಹಿತಿ ಹೊರಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ರಾಜಭವನ ಕಚೇರಿಯಿಂದ ಸಮಯಾವಕಾಶ ಕೋರಿದ್ದಾರೆ ಎಂದು ಸಿಎಂ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಪಾಲರಿಂದ ಸಮಯಾವಕಾಶಕ್ಕೆ ಕಾಯಲಾಗುತ್ತಿದೆ. ಇಂದು ರಾತ್ರಿಯೊಳಗೆ ರಾಜಭವನದಿಂದ ಸಮಯಾವಕಾಶ ಸಿಗುವ ನಿರೀಕ್ಷೆಯಲಿದ್ದಾರೆ. ನಾಳೆ ಭೇಟಿಗೆ ಸಮಯಾವಕಾಶ ನೀಡಿದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಗುರುವಾರ ಬೆಳಗ್ಗೆ 10:30 ಬಳಿಕ ಸಿಎಂ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.