ಅಧಿಕಾರ ಹಸ್ತಾಂತರ,ಕಸರತ್ತು ಊಹಾಪೋಹಗಳಿಗೆ ತೆರೆ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ:

 

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಕಸರತ್ತು, ಊಹಾಪೋಹಗಳಿಗೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿಯೊಂದಿಗೆ ನೂತನ ಸರ್ಕಾರ ರಚನೆಯಾಗಲಿದೆ.

ಕುರ್ಚಿ ಬದಲಾವಣೆ ಚರ್ಚೆಯ ಮಧ್ಯೆ ಕಾಂಗ್ರೆಸ್​ ಹೈಕಮಾಂಡ್​ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಸಭೆ ನಡೆಸಿದರು. ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯಲ್ಲಿ, ಸಿದ್ದರಾಮಯ್ಯ ತಮ್ಮ ನಿರ್ಧಾರ ಪ್ರಕಟಿಸಿದರು.

ಅಧಿಕಾರ ಹಸ್ತಾಂತರ ಸಂಬಂಧ ಮಂಗಳವಾರ ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಸಭೆ ನಡೆದಿತ್ತು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಬೇರೆಯವರಿಗೆ ನೀಡಲು ಸಮ್ಮತಿಸಿದ್ದರು. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರಿಂದಲೇ ಸಂದೇಶ ಬಂದಿದ್ದರಿಂದ, ಸಿದ್ದರಾಮಯ್ಯ ರಾಜೀನಾಮೆ ನೀಡಲು ನಿರ್ಧರಿಸಿದರು ಎಂದು ವಿಶ್ವಾಸನೀಯ ಮೂಲಗಳು ಹೇಳಿವೆ.

ಬಳಿಕ ಮಂಗಳವಾರವೇ ಸಿದ್ದರಾಮಯ್ಯ ಬೆಂಗಳೂರಿಗೆ ಮರಳಿದ್ದರು. ಆದರೆ ಅಧಿಕಾರ ಹಸ್ತಾಂತರದ ಬಗ್ಗೆ ಕಾಂಗ್ರೆಸ್​ನ ಯಾವೊಬ್ಬ ನಾಯಕರಿಂದಲೂ ಸ್ಪಷ್ಟ ಹೇಳಿಕೆ ಹೊರಬಂದಿರಲಿಲ್ಲ. ಸಿದ್ದರಾಮಯ್ಯ ಅವರೇ ಬ್ರೇಕ್​ ಫಾಸ್ಟ್​ ಸಭೆಯಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದೇ ಹೇಳುತ್ತಿದ್ದರು. ಇದೀಗ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ.

ಮಧ್ಯಾಹ್ನ ರಾಜ್ಯಪಾಲ ಥಾವರ್‌ಚಂದ್​ ಗೆಹ್ಲೋಟ್ ಅವರ ಭೇಟಿಗೆ ಸಮಯಾವಕಾಶ ಕೇಳಿರುವ ಸಿದ್ದರಾಮಯ್ಯ, ತಮ್ಮ ಹುದ್ದೆಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಆದರೆ, ರಾಜ್ಯಪಾಲರು ಮಧ್ಯ ಪ್ರದೇಶದ ಇಂದೋರ್‌ಗೆ ತೆರಳಿದ್ದು, ಮಧ್ಯಾಹ್ನ 2.30 ಕ್ಕೆ   ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರಿಗೆ ಸಿದ್ದರಾಮಯ್ಯ  ರಾಜೀನಾಮೆ ಸಲ್ಲಿಸಿ ನಂತರ ಸುದ್ದಿಗೋಷ್ಟಿ ನಡೆಸಲಿದ್ದಾರೆ.

error: Content is protected !!