
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಬುಧವಾರ (ಆ.26) ಭೇಟಿ ನೀಡಿ ಸಾಂತ್ವನ ಹಾಗೂ ಧೈರ್ಯ ತುಂಬಿದರು.
ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ಭೇಟಿ ನೀಡಿದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು, ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಮಾತುಕತೆ ನಡೆಸಿದರು. ಕುಟುಂಬದ ಪರಿಸ್ಥಿತಿ ಹಾಗೂ ಅವರು ಎದುರಿಸುತ್ತಿರುವ ನೋವು ಮತ್ತು ಸಂಕಷ್ಟಗಳ ಕುರಿತು ವಿಚಾರಿಸಿದ ಅವರು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಪುರಂದರ, ಮೋಹನ್ ಶೆಟ್ಟಿ ಉಜಿರೆ, ಬಾಲಕೃಷ್ಣ ಗೌಡ ಬಿರ್ಮೊಟ್ಟು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸೌಜನ್ಯ ಪ್ರಕರಣವು ಹಲವು ವರ್ಷಗಳಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕುಟುಂಬಕ್ಕೆ ನ್ಯಾಯ ದೊರಕಬೇಕೆಂಬ ಆಗ್ರಹವೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕುಟುಂಬದ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿರುವುದು ಗಮನಾರ್ಹವಾಗಿದೆ.