
ಬೆಳ್ತಂಗಡಿ: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರೆತ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷಾ ಹೋರಾಟಕ್ಕೆ ಹಲವು ವರ್ಷಗಳಿಂದ ಕೊಡುಗೆ ನೀಡಿದ ಸಾಹಿತಿಗಳು, ಸಂಶೋಧಕರು, ಪತ್ರಕರ್ತರು, ರಂಗಭೂಮಿ ಕಲಾವಿದರು ಮತ್ತು ಹೋರಾಟಗಾರರನ್ನು ಸ್ಮರಿಸಿ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಹರೀಶ್ ಪೂಂಜ, ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಶ್ರಮಿಸಿದ ದಿವಂಗತ ಶಶಿ ಬಂಡಿಮಾರ್, ತುಳು ಭಾಷೆಯಲ್ಲಿ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ದಿವಂಗತ ವಸಂತ ಬಂಗೇರ ಅವರನ್ನು ವಿಶೇಷವಾಗಿ ಸ್ಮರಿಸಿದ್ದಾರೆ.
ಅದೇ ರೀತಿ, ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಸಮಿತಿ ರಚನೆಗೆ ಮುಂದಾದ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಹಾಗೂ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವಂತೆ ವರದಿ ಸಲ್ಲಿಸಿದ ಡಾ. ಮೋಹನ್ ಆಳ್ವ ಅವರ ಕೊಡುಗೆಯನ್ನೂ ಅವರು ಉಲ್ಲೇಖಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕುವ ನಿಟ್ಟಿನಲ್ಲಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು, ಈ ಮಹತ್ವದ ಮಾನ್ಯತೆಯನ್ನು ಜಾರಿಗೊಳಿಸಿದ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ತುಳುನಾಡಿನ ಜನತೆಯ ಪರವಾಗಿ ಅಭಿನಂದನೆ ಮತ್ತು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
“ಅಪ್ಪೆ ಬಾಸೆ ತುಳುವಿಗೆ ಮಾನ್ಯತೆ ನೀಡಿದ ರಾಜ್ಯ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಹರೀಶ್ ಪೂಂಜ ತಿಳಿಸಿದ್ದಾರೆ.