ಶಿಕ್ಷಣ ಪ್ರೇಮಿ, ಮುರುಡೇಶ್ವರ ನಿರ್ಮಾತೃ ಆರ್. ಎನ್ ಶೆಟ್ಟಿ ನಿಧನ

ಬೆಳ್ತಂಗಡಿ: ಆರ್ ​​ಎನ್​​ ಎಸ್ ಸಮೂಹ ಸಂಸ್ಥೆಗಳ ಸ್ಥಾಪಕ, ಮುರುಡೇಶ್ವರ ನಿರ್ಮಾತೃ ಆರ್.ಎನ್. ಶೆಟ್ಟಿ (92) ಇಂದು ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಆರ್​​ಎನ್​​ಎಸ್ ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರಾಗಿ, ಸಮಾಜಮುಖಿ ಚಿಂತಕರಾಗಿ ಗುರುತಿಸಿಕೊಂಡಿದ್ದ ಅವರು ಉತ್ತರ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರ ಮುರುಡೇಶ್ವರ ಅಭಿವೃದ್ಧಿ ಪಡಿಸಿದ್ದಾರೆ. ಅಷ್ಟೇ ಅಲ್ಲದೆ 249 ಅಡಿ ಎತ್ತರದ ಭವ್ಯ ಗೋಪುರ ಮತ್ತು ಬೆಟ್ಟದ ಮೇಲೆ 123 ಅಡಿ ಎತ್ತರದ ಶಿವನ ಮೂರ್ತಿಯನ್ನು ಸ್ಥಾಪಿಸಿ ಕ್ಷೇತ್ರವನ್ನು ಪುಣ್ಯ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಯೂ ಪರಿವರ್ತಿಸಿದ್ದಾರೆ.ಶೆಟ್ಟಿ ಟ್ರಸ್ಟ್ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣದವರೆಗೆ ವಿದ್ಯಾದಾನ ಮಾಡುತ್ತಿದ್ದಾರೆ. ಅವರ ಈ ಅಸಾಧಾರಣ ಸೇವೆಗೆ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಾಸಿಯಾದ ಕೈಗಾರಿಕಾ ರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಗೌರವಗಳು ಸಂದಿವೆ.ಸದ್ಯ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್​​ಎನ್​​ಎಸ್ ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು. ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಆರ್ ಎನ್ ಶೆಟ್ಟಿ ನಿಧನಕ್ಕೆ ಸಿಎಂ ಸಂತಾಪ :

ಉದ್ಯಮಿ ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ. ಕೃಷಿಕ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಮುಖ ಮಾಡಿದ ಆರ್.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

error: Content is protected !!